ಕಡಬ ವಿದ್ಯಾರ್ಥಿ ನಿಲಯಕ್ಕೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ:ಆಹಾರ ಪದಾರ್ಥಗಳಲ್ಲಿ ಹುಳಗಳು ಪತ್ತೆ.


ಇಲ್ಲಿನ ಸರ್ಕಾರಿ ಕಾಲೇಜು ಬಳಿ ಇರುವ ಬಾಲಕರ ವಸತಿನಿಲಯಕ್ಕೆ  ಲೋಕಾಯುಕ್ತ ಪೊಲೀಸರ ತಂಡ ಬುಧವಾರ ದಿಢೀರ್ ಭೇಟಿ ನೀಡಿದ್ದು ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳೇ ಅಚ್ಚರಿಕೊಂಡಿದ್ದಾರೆ.


ಮಂಗಳೂರು ಲೋಕಾಯುಕ್ತ ಎಸ್ಪಿ ಕುಮಾರ್‌ಚಂದ್ರ ಮತ್ತು ಡಿವೈಎಸ್‌ಪಿ ಗಾನಾ ಪಿ.ಕುಮಾರ್ ಮತ್ತು ಇನ್ಸ್‌ಪೆಕ್ಟರ್ ಚಂದ್ರಶೇಖರ್ ನೇತೃತ್ವದಲ್ಲಿ ಲೋಕಾಯುಕ್ತ ಸಿಬ್ಬಂದಿ ಬಾಲಕರ ವಸತಿಗೃಹದಲ್ಲಿ ತಪಾಸಣೆ ನಡೆಸಿದರು. ಈ ವೇಳೆ ಕಳಪೆ ಆಹಾರ ಪೂರೈಕೆ, ಸಿಸಿ ಕ್ಯಾಮರಾ ಸರಿಯಿಲ್ಲದ ವಿಚಾರ, ಮ್ಯಾಟ್ ಮಾರಾಟ ಆರೋಪ,  ಸುರಕ್ಷತಾ ಸಿಬ್ಬಂದಿ, ವಾರ್ಡನ್‌ಗಳೇ ಇಲ್ಲದಿರುವುದು ಸೇರಿದಂತೆ ಹಲವಾರು ವಿಚಾರಗಳು ಬೆಳಕಿಗೆ ಬಂದಿವೆ.

ವಾರ್ಡನ್ ಸೇರಿದಂತೆ  ಸಿಬ್ಬಂದಿ ಹಾಸ್ಟೇಲ್ಗೆ ಸರಿಯಾಗಿ ಬಾರದಿರುವುದು ಮತ್ತು ಮಕ್ಕಳಿಗಾಗಿ ಬಂದಿರುವ ರಬ್ಬರ್ ‌ಸ್ಪೋರ್ಟ್ಸ್ ಮ್ಯಾಟ್‌ಗಳಲ್ಲಿ ಸುಮಾರು 110 ಮ್ಯಾಟ್‌ಗಳ ಮಾರಾಟ ಮತ್ತು ಆಹಾರದ ಗುಣಮಟ್ಟದ ಕುರಿತು ಅಧಿಕಾರಿಗಳಿಗೆ ಇಲ್ಲಿನ ಮಕ್ಕಳು ವಿವರಿಸಿದರು .ಕೂಡಲೇ ಅಡುಗೆ ಸಾಮಗ್ರಿ ಸಂಗ್ರಹಿಸಿಟ್ಟಿದ್ದ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಆಹಾರ ಪದಾರ್ಥಗಳಲ್ಲಿ ಹುಳಗಳು ಸಂಚರಿಸುವುದನ್ನು ಕಣ್ಣಾರೆ ಕಂಡಿದ್ದಾರೆ.

ರೂಮ್‌ಗಳಲ್ಲಿ ಬೆಳಕಿನ ಕೊರತೆ, ಕೆಲವು ಮಕ್ಕಳು ತಾವೇ ಅಕ್ವೇರಿಯಂ ಸೇರಿದಂತೆ ಇತರ ವಸ್ತುಗಳನ್ನು ತಂದಿರುವ ಬಗ್ಗೆ, ಹಾಜರಾತಿ ಪುಸ್ತಕದಲ್ಲಿ ಮಕ್ಕಳು ಮತ್ತು ಅಧಿಕಾರಿಗಳ ಸಹಿ ಇಲ್ಲದಿರುವ ಬಗ್ಗೆ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸಿದರು.

“ನಮಗೆ ಸರ್ಕಾರದಿಂದ ಹಣಕಾಸು ಬಿಡುಗಡೆ ಆಗುತ್ತಿಲ್ಲ. ಇಲ್ಲಿ 28 ಮಕ್ಕಳಿದ್ದಾರೆ. ಆದರೆ ಇರುವುದು ಇಬ್ಬರು ತಾತ್ಕಾಲಿಕ ಸಿಬ್ಬಂದಿ ಮಾತ್ರ. ಮಕ್ಕಳಿಗೆ ಆಹಾರ ಕೊರತೆ ಸೇರಿದಂತೆ ಹಲವಾರು ಸಮಸ್ಯೆಗಳಿವೆ. ನಾವು  ಈ ವಿಚಾರವನ್ನು ಹಲವು ಬಾರಿ ಸರ್ಕಾರದ ಗಮನಕ್ಕೆ ತಂದರೂ‌ ಪ್ರಯೋಜನವಾಗುತ್ತಿಲ್ಲ.ಆಹಾರ ಧಾನ್ಯಗಳಿಗಾಗಿ ಹಣಕಾಸು ಬಿಡುಗಡೆಯಾಗುತ್ತಿಲ್ಲ” ಎಂದು ಕಡಬ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ವಿನಯಕುಮಾರಿ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲೋಕಾಯುಕ್ತ ಎಸ್ಪಿ  ಕೂಡಲೇ ವರದಿ ಮಾಡಿ ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದ್ದಾರೆ.ಲೋಕಾಯುಕ್ತ ಸಿಬ್ಬಂದಿ ಸುರೇಂದ್ರ, ಮಹೇಶ್, ವಿನಾಯಕ, ಶರತ್ ಸಿಂಗ್, ರುದ್ರೇಶ್, ವೀವೇಕ್ ತಪಾಸಣೆಯಲ್ಲಿ ಭಾಗವಹಿಸಿದ್ದರು.



Post a Comment

أحدث أقدم