ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಗ್ರಾಮದ ಅರಂಪಾಡಿಯಲ್ಲಿ ಚಿರತೆ ದಾಳಿ ನಡೆದಿದ್ದು, ಮನೆ ಅಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದ ಘಟನೆ ಬೆಳಕಿಗೆ ಬಂದಿದೆ.
ಅರಂಪಾಡಿ ನಿವಾಸಿ ಈಶ್ವರ ಗೌಡ ಅವರ ಮನೆಯ ಅಂಗಳದಲ್ಲಿ ಏಪ್ರಿಲ್ 8ರ ತಡ ರಾತ್ರಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಈ ಘಟನೆ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯಗಳು ಇದೀಗ ಸ್ಥಳೀಯರಲ್ಲಿ ಆತಂಕವನ್ನು ಹೆಚ್ಚಿಸಿವೆ.
ಸ್ಥಳೀಯರ ಮಾಹಿತಿ ಪ್ರಕಾರ, ಕೆಲ ದಿನಗಳ ಹಿಂದೆಯೇ ಇದೇ ಪ್ರದೇಶದಲ್ಲಿ ಮತ್ತೊಬ್ಬರ ಮನೆಯ ನಾಯಿಯನ್ನು ಚಿರತೆ ಕೊಂದ ಘಟನೆ ಕೂಡ ನಡೆದಿತ್ತು ಎನ್ನಲಾಗಿದೆ. ಇದರಿಂದಾಗಿ ಗ್ರಾಮದಲ್ಲಿ ಭೀತಿ ವಾತಾವರಣ ನಿರ್ಮಾಣವಾಗಿದೆ.
ಅರಂಪಾಡಿ ವ್ಯಾಪ್ತಿಯಲ್ಲಿ ಕಾಡು ಪ್ರದೇಶ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ, ರಾತ್ರಿ ವೇಳೆ ರಸ್ತೆಗಳಲ್ಲಿ ಸಂಚರಿಸಲು ಗ್ರಾಮಸ್ಥರು ಭಯಪಡುತ್ತಿದ್ದಾರೆ. ವಿಶೇಷವಾಗಿ ಮಕ್ಕಳು ಮತ್ತು ಮಹಿಳೆಯರು ಹೊರಗೆ ಹೋಗಲು ಆತಂಕ ಪಡುತ್ತಿರುವುದಾಗಿ ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಕ್ಷಣ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ. ಚಿರತೆಯನ್ನು ಬೋನ್ ಅಳವಡಿಸಿ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ.
ಇದರ ಜೊತೆಗೆ, ರಾತ್ರಿ ವೇಳೆ ಸುರಕ್ಷತೆಗಾಗಿ ಪಂಚಾಯತ್ ವತಿಯಿಂದ ರಸ್ತೆ ಬದಿಯಲ್ಲಿ ಸೋಲಾರ್ ಲೈಟ್ ಅಳವಡಿಸುವಂತೆ ಕೂಡ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸ್ಥಳದಲ್ಲಿ ಚಿರತೆ ಸಂಚರಿಸುವ ಬಗ್ಗೆ ಮಾಹಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Post a Comment